ಕೊಪ್ಪಳಕ್ಕೆ ಶೀಘ್ರದಲ್ಲಿ ಹೆಚ್ ಡಿ ದೇವೇಗೌಡ : ಸಿವಿಸಿ

ಕೊಪ್ಪಳ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ
ಹೆಚ್ ಡಿ ದೇವೇಗೌಡ ಅವರು ಶೀಘ್ರದಲ್ಲಿ ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರ ತಡರಾತ್ರಿ ನವ ದೆಹಲಿಯ ಅವರ ನಿವಾಸದಲ್ಲಿ ಪಕ್ಷ ಸಂಘಟನೆ ಕುರಿತು ಸುಧೀರ್ಘ ಚರ್ಚೆ ನಡೆಯಿತು. ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಹಾಗೂ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅವರು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಕೊಪ್ಪಳದಲ್ಲಿ ಪಕ್ಷ ಗಣಿನೀಯವಾಗಿ ಸಂಘಟನೆಗೊಂಡಿದೆ. ಮೈತ್ರಿ ಪಕ್ಷ ಬಿಜೆಪಿಯೊಂದಿಗೆ ಅನ್ಯೋನ್ಯ ಸಂಬಂಧ ಹೊಂದಿದೆ. ಜಂಟಿಯಾಗಿ ಜಿಲ್ಲೆಯಾದ್ಯಂತ ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಪ್ಪಳಕ್ಕೆ ಶೀಘ್ರವೇ ಭೇಟಿ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ಸಿವಿಸಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರ ನಿಯೋಗವು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ವಿವಿಧ ಯೋಜನೆಗಳನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿತು.
ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಬಗ್ಗೆಯೂ ಚರ್ಚೆ ನಡೆಯಿತು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹಾನಿಕಾರಕ ಕೈಗಾರಿಕಾ ಘಟಕಗಳ ವಿರುದ್ಧ ಕೊಪ್ಪಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸದಂತೆ
ರಾಜ್ಯ ಸರಕಾರಕ್ಕೆ ಒತ್ತಾಯಿಸಿ ನಡೆದ ‘ಕೊಪ್ಪಳ ಬಂದ್’ ಮುಂದಿನ ವಾರ ಒಂದು ವರ್ಷ ಪೂರ್ಣಗೊಳಿಸುತ್ತಿರುವುದು ತಮ್ಮ ಗಮನದಲ್ಲಿದೆ. ಕೇಂದ್ರ ಸರಕಾರದ ಅಧಿಕಾರಿಗಳ ತಂಡ ಈಗಾಗಲೇ ವಸ್ತುಸ್ಥಿತಿ ಕುರಿತು ವರದಿ ಸಲ್ಲಿಸಿದೆ. ಇಂತಹ ವಿಷಯಗಳ ಕುರಿತು ಅಂತಿಮ ನಿರ್ಣಯ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರದ್ದು. ಆದರೆ ಜನತೆಯ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರಕಾರದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆಂದು ಸಿವಿಸಿ ಹೇಳಿದ್ದಾರೆ.
ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ನೇತೃತ್ವದ ನಿಯೋಗದಲ್ಲಿ ಶಾಸಕರುಗಳಾದ ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಶ್ರೀ ಮಲ್ಲಿಕಾರ್ಜುನ್ ಖೂಬಾ, ರಾಜಾ ವೆಂಕಟಪ್ಪ ನಾಯಕ್, ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹಾಗೂ ದೊಡ್ಡಪ್ಪಗೌಡ ಪಾಟೀಲ್ ಇದ್ದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಶೀರ್ಷಿಕೆಗಳು: ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರನ್ನು ನವ ದೆಹಲಿಯ ಅವರ ನಿವಾಸದಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಭೇಟಿಯಾದರು.
ಜೆಡಿಎಸ್ ಶಾಸಕರು, ಮಾಜಿ ಸಚಿವರು ಹಾಗೂ ಪಕ್ಷದ ಮುಖಂಡರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರನ್ನು ನವ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದರು.
ಜೆಡಿಎಸ್ ಮುಖಂಡರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಯೋಜನೆಗಳನ್ನು ಮಂಜೂರು ಮಾಡುವಂತೆ ಮನವಿ ಪತ್ರ ಸಲ್ಲಿಸಿದರು.



